ಚಾಮರಾಜನಗರ : ಶಿವು
ಮಂಡ್ಯದಲ್ಲಿ ರೈತ ಸಂಘಟನೆ ಮುಖಂಡರ ಬಂಧನ ವಿರೋಧಿಸಿ ನಗರದಲ್ಲಿ ರೈತರಿಂದ ಪ್ರತಿಭಟನೆ ನಡೆಸಲಾಯಿತು.
ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಡ್ಯದಲ್ಲಿ ಕಳೆದ 52 ದಿನಗಳಿಂದ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರಕ್ಕೆ ಇಂದು ರೈತರು ರಕ್ತಾಭಿಷೇಕ ಮಾಡುತ್ತಿದ್ದ ವೇಳೆಯಲ್ಲಿ ಪೊಲೀಸರು ಏಕಾಏಕಿ ಪ್ರತಿಭಟನಾ ನಿರತ ರೈತರನ್ನು ಬಂಧಿಸಿದ್ದಾರೆ.

ಅಲ್ಲದೆ ಮಹಾತ್ಮ ಗಾಂಧೀಜಿ ಭಾವಚಿತ್ರ ಸೇರಿದಂತೆ ಮಹನೀಯರ ಭಾವಚಿತ್ರಗಳನ್ನು ಹಾನಿ ಮಾಡಿ ಅಪಮಾನಗಳಿಸಿದ್ದಾರೆ ಎಂದು ಆರೋಪಿಸಿ ಹಾಗೂ ಘಟನೆಯನ್ನು ವಿರೋಧಿಸಿ ಚಾಮರಾಜನಗರದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ರೈತ ಸಂಘದ ಕಚೇರಿಯಿಂದ ಹೊರಟ ಪ್ರತಿಭಟನೆಗಾರರು ಚಿಕ್ಕ ಅಂಗಡಿ ಬೀದಿ ಮೂಲಕ ಜಾಲಹಳ್ಳಿ ಹುಂಡಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಬಂಧಿತ ರೈತರನ್ನು ಕೂಡ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು, ಈ ವೇಳೆ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಮಹೇಶ್ ಪ್ರಭು, ರಾಜ್ಯ ವರಿಷ್ಠರಾದ ಹೆಗ್ಗವಾಡಿಪುರ ಮಹೇಶ್ ಕುಮಾರ್, ಜಿಲ್ಲಾಧ್ಯಕ್ಷ ಹೆಬ್ಬಸೂರು ಬಸವಣ್ಣ, ಪ್ರಧಾನ ಕಾರ್ಯದರ್ಶಿ ಜ್ಯೋತಿಗೌಡನಪುರದ ಸಿದ್ದರಾಜು, ದೇವನಹಳ್ಳಿ ಪ್ರಸಾದ್, ಡಿಸಿ ಸಿದ್ದರಾಜು ಪ್ರಮುಖ ಮುಖಂಡರು ಭಾಗವಹಿಸಿದ್ದರು.
