Janataa24 NEWS DESK
Farming: Monsoon rains are high, 82 lakh hectares of sowing target in the state- Krishna Byregowda.

ಕಲಬುರಗಿ: ಪ್ರಸಕ್ತ ವರ್ಷ ಮುಂಗಾರು ಪೂರ್ವ ಮತ್ತು ಮುಂಗಾರು ಹಂಗಾಮಿನಲ್ಲಿ ಮಳೆ ವಾಡಿಕೆಗ್ಗಿಂತ ಹೆಚ್ಚಾಗಿರುವುದರಿಂದ ಕೃಷಿ ಚಟುವಟಿಕೆ ಆಶದಾಯಕವಾಗಿವೆ. ಈ ವರ್ಷ ರಾಜ್ಯದಾದ್ಯಂತ 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸೋಮವಾರ ಇಲ್ಲಿನ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೂವರೆಗೆ 33 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಇದು ಗುರಿಗೆ ಶೇ.40ರಷ್ಟು ಬಿತ್ತನೆಯಾಗಿದೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ ಕೇವಲ 8.37 ಲಕ್ಷ ಹೆಕ್ಟೇರ್ ಪ್ರದೇಶ ಮಾತ್ರ ಬಿತ್ತನೆಯಾಗಿತ್ತು ಎಂದು ಸಚಿವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಮುಂಗಾರು ಪೂರ್ವ 115 ಮಿ.ಮೀ ಮಳೆಯಾದರೆ ಜೂನ್ ಮಾಹೆಯಲ್ಲಿ ಒಟ್ಟಾರೆ 148 ಮಿ.ಮೀ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 95 ಮಿ.ಮೀ. ಮಳೆಯಾಗಿದ್ದು, ಇದು ವಾಡಿಕೆಗ್ಗಿಂತ 40ಮಿ.ಮೀ ಹೆಚ್ಚು. ಅದೇ ರೀತಿ ಉತ್ತರ ಒಳನಾಡಿನಲ್ಲಿ 78 ಮಿ.ಮೀ. ಮಳೆ ವಾಡಿಕೆಯಾದರೆ, ಮಳೆ ಬಿದ್ದಿದ್ದು 134 ಮಿ.ಮೀ. ಇನ್ನು ಮಳೆನಾಡು, ಕರಾವಳಿಯಲ್ಲಿ ವಾಡಿಕೆಯಂತೆ ಮಳೆ ಬೀಳದಿದ್ದರೂ., ಇತ್ತೀಚಿನ 2-3 ದಿನದಲ್ಲಿ ಅಲ್ಲಿ ಮಳೆಯಾಗುತ್ತಿರುವುದರಿಂದ ಅಗತ್ಯಕ್ಕನುಗುಣವಾಗಿ ಅಲ್ಲಿ ಮಳೆಯಾಗಿದೆ ಎಂದರು.
ಹೊಸ ತಾಲೂಕುಗಳಿಗೆ ತಹಶೀಲ್ದಾರ ಕಚೇರಿ ಮಾತ್ರ ಇವೆ. ಉಳಿದ ಇಲಾಖೆಗಳ ತಾಲೂಕಾ ಕಚೇರಿ ಇಲ್ಲ. ಈ ಕಚೇರಿ ಆರಂಭ ಯಾವಾಗ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಂದಿನ 3 ವರ್ಷದಲ್ಲಿ ಹಂತ ಹಂತವಾಗಿ ತಾಲೂಕಾ ಕಚೇರಿ ಆರಂಭಿಸಲಾಗುವುದು ಎಂದರು.
2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ:
ಕಂದಾಯ ಇಲಾಖೆಯು ಎಲ್ಲಾ ಆಯಾಮದಿಂದ ಡಿಜಿಟಲಿಕರಣಕ್ಕೆ ಮುಂದಾಗಿದೆ. ಈಗಾಗಲೆ ಇ-ಕಚೇರಿ ಅನುಷ್ಠಾನದಲ್ಲಿ ಶೇ.80ರಷ್ಟು ಪ್ರಗತಿ ಸಾಧಿಸಿದೆ. ಭೂಸುರಕ್ಷಾ ಯೋಜನೆಯಡಿ ಕಳೆದ ಫೆಬ್ರವರಿಯಲ್ಲಿ ರಾಜ್ಯದ 31 ತಾಲೂಕಾ ಕಚೇರಿಯಲ್ಲಿ ಪ್ರಾಯೋಗಿಕವಾಗಿ ರೆಕಾರ್ಡ್ ರೂಂ ದಾಖಲೀಕರಣ ಕಾರ್ಯ ಪ್ರಾರಂಭಿಸಿದ್ದು, ಇದೂವರೆಗೆ 3 ಕೋಟಿ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ.
ಮುಂದಿನ ಒಂದು ತಿಂಗಳಿನಲ್ಲಿ ರಾಜ್ಯದ ಉಳಿದ ತಾಲೂಕಿನಲ್ಲೂ ಇದಕ್ಕೆ ಚಾಲನೆ ನೀಡಲಾಗುವುದು. ವಿ.ಎ., ಆರ್.ಐ. ಗಳಿಗೆ ಲ್ಯಾಪಟಾಪ್ ವಿತರಿಸಲಾಗುತ್ತಿದ್ದು,
ಅವರು ಹಳ್ಳಿಯಲ್ಲಿಯೆ ಕುಳಿತು ಕೆಲಸ ಮಾಡಬಹುದು. ಕಂದಾಯ ಕೋರ್ಟ್ ಪ್ರಕರಣಗಳ ಸ್ಥಿತಿಗತಿ ಅರಿಯಲು ಆರ್.ಸಿ.ಸಿ.ಎಂ.ಎಸ್.(ರೆವೆನ್ಯೂ ಕೋರ್ಟ್ ಕೇಸ್ ಮ್ಯಾನೇಜಮೆಂಟ್ ಸಿಸ್ಟಮ್) ತಂತ್ರಾಂಶ ಅಭಿವೃದ್ಧಿಪಡಿಸಿದೆ. ಒಟ್ಟಾರೆ 2025ರ ಅಂತ್ಯಕ್ಕೆ ಕಂದಾಯ ಇಲಾಖೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡಲಾಗುವುದೆಂದು ಸಚಿವ ಕೃಷ್ಣ ಬೈರೇಗೌಡ(Krishna Byregowda)ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ ಕಠಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲಕುಮಾರ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಇದ್ದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en